ಮಡಿಕೇರಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಚಾರ ಆರೋಪಗಳು ಸಭೀತಾಗುತ್ತಿರುವ ಹಿನ್ನೆಲೆ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ.
ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ , ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಅವರಿಗೆ ದೂರವಾಣಿ ಕರೆ ಮಾಡಿ, ಹಣ ನೀಡಿದವರಿಗೆ ಮಾತ್ರ ವಸತಿ ನೀಡಲಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ಸಾಬೀತಾಗಿದೆ. ಬಂಡ ಸರ್ಕಾರವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಸವಾಲೆಸೆದ ರವಿ ಕಾಳಪ್ಪ ಚುನಾವಣೆ ನಡೆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮೂಡ ಹಗರಣ, ವಾಲ್ಮಿಕಿ ಹಗರಣ ಸೇರಿದಂತೆ ಇತರ ಆರೋಪಗಳು ಸಾಭಿತಾದರೂ ಕೂಡ ಸರ್ಕಾರ ಸಮರ್ಥನೆ ಮಾಡಿಕೊಳ್ಳುತ್ತಾ ಸಾಗುತ್ತಿದೆ. ಇದು ನಮ್ಮ ದುರಾದೃಷ್ಟಕರ ಎಂದ ಅವರು, ರಾಜ್ಯದಲ್ಲಿ ಕಮಿಷನ್ ಮಿತಿ ಮೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರಿನ ಕೊಡವ ಸಮಾಜಕ್ಕೆ ೭ ಎಕರೆ ಜಾಗ ನೀಡದ ಕುರಿತು ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಜಾಗ ನಿರ್ಧಾರ ಮಾಡಿತ್ತು. ಇವರೆ ವಿರೋಧಿಸುತ್ತಿದ್ದರು. ಆದರೆ, ಇಂದು ಏಕಪಕ್ಷೀಯವಾಗಿ ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದೆ. ಜನರಿಗೆ ಸತ್ಯಾಂಶವನ್ನು ಹೇಳುವಂತಾಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ, ಕೇಂದ್ರ ಸರ್ಕಾರ ಎಲ್ಲರೂ ಸಮಾನರು ಎಂದು ವಿವಿಧ ಯೋಜನೆಗಳನ್ನು ಜಾರಿಗೆ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ಧರ್ಮಾದಾರಿತ ರಾಜಕಾರಣ ಮಾಡುತ್ತಿದ್ದು, ಇದೊಂದು ಬಂಡ ಸರ್ಕಾರವಾಗಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ಪ್ರಮುಖರಾದ ಅಜಿಲ್ ಕೃಷ್ಣ ಸುದ್ದಿಗೋಷ್ಠಿಯಲ್ಲಿದ್ದರು.


