ಮಡಿಕೇರಿ : ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಿಐಟಿಯು ಸಂಯೋಜಿತ ಸಂಘದ ಸದಸ್ಯರು ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು.
ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ ಗ್ರಾ.ಪಂ ನೌಕರರಿಗೆ ನಿಗಧಿಯಾಗಿರುವ ಕನಿಷ್ಠ ವೇತನದ ನಿಯಮವನ್ನು ಸರ್ಕಾರ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಸರ್ಕಾರ ಯಾವುದೇ ಸ್ಪಂದನೆ ನೀಡುತ್ತಿಲ್ಲವೆಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಗ್ರಾ.ಪಂ ಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನೌಕರರ ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಕಾರ್ಮಿಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.

