
ಸರ್ಕಾರದಿಂದ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ಮತ್ತು ಪ್ರೋತ್ಸಾಹ
ವಿಶ್ವ ಮಾರುಕಟ್ಟೆಯಲ್ಲಿ ಕಾಫಿಗೆ ಬಹು ಬೇಡಿಕೆ: ತಳೂರು ಕಿಶೋರ್ ಕುಮಾರ್
*************************************************************
ಮಡಿಕೇರಿ -ಸರ್ಕಾರ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ ಸಂಪಾಜೆ, ಕರಿಕೆ, ಪೆರಾಜೆ, ಚೆಂಬು ಭಾಗದಲ್ಲಿಯೂ ಸಹ ಕಾಫಿ ಬೆಳೆಯುವಂತಾಗಬೇಕು ಎಂದು ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್ ಅವರು ಸಲಹೆ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರ ಕಾಫಿ ಉತ್ಪಾದನೆಗೆ ಸಹಾಯಧನ ಕಲ್ಪಿಸುತ್ತಿದೆ. ಜತೆಗೆ ಪ್ರೋತ್ಸಾಹ ನೀಡುತ್ತಿದೆ. ಹಾಗಾಗಿ ಅಡಿಕೆ, ರಬ್ಬರ್, ಗೇರು ಜೊತೆಗೆ ಕಾಫಿ ಬೆಳೆಯಲು ಪ್ರಯತ್ನಿಸುವಂತೆ ಸಲಹೆ ಮಾಡಿದರು.
ದೇಶವು ಕಾಫಿ ಉತ್ಪಾದನೆಯಲ್ಲಿ 3.60 ಲಕ್ಷ ಮೆಟ್ರಿಕ್ ಟನ್ ಉತ್ಪಾದಿಸುತ್ತಿದ್ದು, ಇದರಲ್ಲಿ 2.30 ಲಕ್ಷ ಮೆಟ್ರಿಕ್ ಟನ್ ಕಾಫಿಯನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಉಳಿದಂತೆ 1.50 ಲಕ್ಷ ರೂ. ಮೆಟ್ರಿಕ್ ಟನ್ ದೇಶದಲ್ಲಿಯೇ ವ್ಯಾಪಾರ ಆಗುತ್ತಿದೆ ಎಂದು ತಳೂರು ಕಿಶೋರ್ ಕುಮಾರ್ ಹೇಳಿದರು.
ರಾಜ್ಯವು ಕಾಫಿ ಉತ್ಪಾದನೆಯಲ್ಲಿ ಶೇ.60 ರಿಂದ 65 ರಷ್ಟು, ಕೊಡಗು ಜಿಲ್ಲೆ ಕಾಫಿ ಉತ್ಪಾದನೆಯಲ್ಲಿ ಶೇ.30 ರಿಂದ 35 ರಷ್ಟು, ಹಾಗೆಯೇ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಿಂದ ಶೇ.25 ರಿಂದ 30 ರಷ್ಟು, ಕೇರಳ, ತಮಿಳುನಾಡು, ಆಂದ್ರ ಪ್ರದೇಶದಲ್ಲಿ ಶೇ.20 ರಿಂದ 30 ರಷ್ಟು ಹಾಗೆಯೇ ಈಶಾನ್ಯ ರಾಜ್ಯಗಳಲ್ಲಿ ಶೇ.10 ರಿಂದ 15 ರಷ್ಟು ಕಾಫಿಯನ್ನು ಉತ್ಪಾದಿಸಲಾಗುತ್ತಿದೆ ಎಂದು ಕಾಫಿ ಮಂಡಳಿ ಸದಸ್ಯರು ವಿವರಿಸಿದರು
ಸಹಕಾರ ಬ್ಯಾಂಕ್ಗಳು ಶೈಕ್ಷಣಿಕ ಸಾಲ ಸೌಲಭ್ಯವನ್ನು ನೀಡುತ್ತಿರುವುದು ಶ್ಲಾಘನೀಯ. ಸಹಕಾರ ಸಂಘಗಳಲ್ಲಿಯೂ ಸಹ ರಾಷ್ಟ್ರೀಕೃತ ಬ್ಯಾಂಕ್ಗಳಂತೆ ಗಣಕೀಕರಣವಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ಪೆರಾಜೆ ಸಹಕಾರ ಸಂಘ ಸ್ಥಾಪಿಸುವಲ್ಲಿ ಡಿಸಿಸಿ ಬ್ಯಾಂಕ್ ಹೆಚ್ಚಿನ ಸಹಕಾರ ನೀಡಿದೆ ಎಂದರು.
ಪ್ರತಿಯೊಂದು ಕ್ಷೇತ್ರದಲ್ಲೂ ಆರ್ಥಿಕ ಶಿಸ್ತು ಇದ್ದಾಗ ಅಭಿವೃದ್ಧಿ ಸಾಧ್ಯ. ಪೆರಾಜೆ, ಚೆಂಬು, ಸಂಪಾಜೆ ಭಾಗದವರು ಅಡಿಕೆಯನ್ನು ನಂಬಿ ಬದುಕುತ್ತಾರೆ. ಅಡಿಕೆ ರೋಗದಿಂದ ಆದಾಯ ಕಡಿಮೆಯಾಗಿದೆ. ಈಗ ಸದ್ಯಕ್ಕೆ ಮಿಶ್ರ ಬೆಳೆ ಬೆಳೆಯುವಂತಾಗಬೇಕು ಎಂದು ಹೇಳಿದರು.
ಸಹಕಾರ ಸಂಘಗಳಲ್ಲಿ ಸಾಲ ಪಡೆಯಬೇಕು. ಕಾಲ ಕಾಲಕ್ಕೆ ಮರು ಪಾವತಿ ಮಾಡಬೇಕು. ಸಹಕಾರ ಸಂಘದಲ್ಲಿ ಪಾರದರ್ಶಕತೆ ಕಾಪಾಡಬೇಕು. ಪಿ.ಎಂ.ವಿಶ್ವಕರ್ಮ ಯೋಜನೆ ಸೌಲಭ್ಯ ತಲುಪಬೇಕು ಎಂದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲಾ ವ್ಯವಹಾರಗಳು ಸಹಕಾರ ಸಂಘಗಳ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ಆತ್ಮ ನಿರ್ಭರ ಭಾರತ ಯೋಜನೆಯಡಿ ರಾಷ್ಟ್ರ ಸ್ವಾವಲಂಬನೆಯತ್ತ ಹೆಜ್ಜೆ ಇಡಲಾಗುತ್ತದೆ. ಆ ನಿಟ್ಟಿನಲ್ಲಿ ಬೇರೆಯವರನ್ನು ಅವಲಂಭಿಸದೆ ಸ್ಥಳೀಯವಾಗಿ ದೊರೆಯುವ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕತೆಯನ್ನು ಉತ್ತೇಜಿಸಬೇಕು ಎಂದರು.
ಭಾರತ ದೇಶ ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ ಇತರೆ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸುವಂತಾಗಬೇಕು ಎಂದರು.
ದೀಪಾವಳಿ ಸಂದರ್ಭದಲ್ಲಿ ಜಿಎಸ್ಟಿ ಕಡಿತದಿಂದ ರಾಷ್ಟ್ರದಲ್ಲಿ 6 ಲಕ್ಷ ಕೋಟಿ ರೂ. ವ್ಯವಹಾರ ಆಗಿರುವುದು ವಿಶೇಷವಾಗಿದೆ ಎಂದರು.
ಕೊಡಗು ಜಿಲ್ಲೆ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರಾದ ಹೊಸೂರು ಸತೀಶ್ ಕುಮಾರ್ ಅವರು ಮಾತನಾಡಿ ಸಹಕಾರ ಸಂಘಗಳಲ್ಲಿಯೂ ಹಲವು ಲೋಪದೋಷಗಳು ಇದ್ದು, ಅದನ್ನು ಸರಿಪಡಿಸಿಕೊಂಡು ಅಭಿವೃದ್ಧಿ ಪಥದತ್ತ ಸಾಗಬೇಕು. ಸಹಕಾರ ಸಂಘಗಳು ಗ್ರಾಮೀಣ ಜನರ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಶ್ಯಾಮಲಾ ಅವರು ಮಾತನಾಡಿ ಸಹಕಾರ ಕ್ಷೇತ್ರ ಬಹಳ ವಿಶಾಲವಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಸಹಕಾರ ಕ್ಷೇತ್ರದ ಮೂಲಕ ಗ್ರಾಮೀಣ ಅಭಿವೃದ್ಧಿ ಆಗಬೇಕು. ಸ್ವಾವಲಂಬಿ ಬದುಕಿಗೆ ಸಹಕಾರ ಕ್ಷೇತ್ರ ಸಹಕಾರಿಯಾಗಿದೆ ಎಂದರು.
ಸಹಕಾರ ಸಪ್ತಾಹ ಸಂದರ್ಭದಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಯಿತು. ಹಾಗೆಯೇ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ತರಕಾರಿ ಹಾಗೂ ವಿವಿಧ ವಸ್ತುಗಳ ಮಾರಾಟ ಮೇಳ ನಡೆಯಿತು.

