ಚೇಲಾವರ ಗ್ರಾಮದ ತೋಟಗಳಲ್ಲಿ ಕಾಡಾನೆ ದಾಂಧಲೆ – ಆನೆ ಹಾವಳಿ ನಿಯಂತ್ರಿಸಲು ಗ್ರಾಮಸ್ಥರ ಒತ್ತಾಯ
ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು :ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಅಪಾರ ಪ್ರಮಾಣದಲ್ಲಿ ಕೃಷಿ ಗಿಡಗಳನ್ನು ತುಳಿದು ನಾಶಪಡಿಸಿ ನಷ್ಟಉಂಟು ಮಾಡಿದೆ.
ಚೇಲಾವರ ಗ್ರಾಮದ ಮುಂಡಿಯೊಳಂಡ ಮಿಟ್ಟು ಅಪ್ಪಯ್ಯ ಹಾಗೂ ಮುಂಡಿಯೋಳಂಡ ಕುಟುಂಬಸ್ಥರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ,ಬಾಳೆ ಹಾಗೂ ಮತ್ತಿತರರ ಕೃಷಿ ಗಿಡಗಳನ್ನು ತುಳಿದು ನಾಶ ಪಡಿಸಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ಗ್ರಾಮದಲ್ಲಿ ನಿರಂತರ ಕಾಡಾನೆ ಹಾವಳಿಯಿಂದ ಕಾರ್ಮಿಕರು ತೋಟಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.ಈ ವ್ಯಾಪ್ತಿಯಲ್ಲಿ ಗ್ರಾಮಸ್ಥರು,ರೈತರು ಜೀವ ಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಹಲವು ಬಾರಿ ಕಾಡಾನೆ ಈ ವ್ಯಾಪ್ತಿಯ ರೈತರ ಹಾಗೂ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಆದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಕಾಡಾನೆ ಹಾವಳಿ ನಿಯಂತ್ರಿಸಲು ಯಾವುದೇ ಶಾಶ್ವತ ಪರಿಹಾರ ಒದಗಿಸಿಲ್ಲ. ಮುಂದೆ ಜೀವ ಬಲಿ ಪಡೆಯುವ ಮುನ್ನ ಕಾಡಾನೆಗಳು ತೋಟಗಳಿಗೆ ಪ್ರವೇಶಿಸಿದಂತೆ ಅರಣ್ಯಇಲಾಖೆ ಕ್ರಮ ಕೈಗೊಳ್ಳಬೇಕು. ಅದರಂತೆ ಗ್ರಾಮದಲ್ಲಿ ನಿರಂತರ ಹಾವಳಿ ನಡೆಸುತ್ತಿರುವ ಕಾಡಾನೆಗಳನ್ನು ಶೀಘ್ರದಲ್ಲಿ ಕಾಡಿಗಟ್ಟುವ ಅಥವಾ ಸೆರೆ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅದರಂತೆ ನಷ್ಟ ಸಂಭವಿಸಿದ ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

