ಯುವಜನರ ಸಬಲೀಕರಣಕ್ಕೆ ‘ಮೈ ಭಾರತ್’ ಬಳಸಿ: ಜಿಲ್ಲಾಧಿಕಾರಿ ಕರೆ
ಮಡಿಕೇರಿ, ಜು.24: ಯುವಜನರಲ್ಲಿ ನಾಯಕತ್ವ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಮೈ ಭಾರತ್’ ಕಾರ್ಯಕ್ರಮವನ್ನು ಜಿಲ್ಲೆಯ ಯುವಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಕಾಲೇಜುಗಳು, ಯುವಕ ಮಂಡಲಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೈ ಭಾರತ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಮನ್ವಯದೊಂದಿಗೆ ಉದ್ಯೋಗೋದ್ಯಮ, ನಾಯಕತ್ವ, ಕೌಶಲ್ಯ ತರಬೇತಿ ಮತ್ತು ಸ್ವಯಂಸೇವಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.
ಜಿಲ್ಲಾ ಯೂತ್ ಅಧಿಕಾರಿ ಅಖಿಲ್ ಮಾತನಾಡಿ, 2026-27ನೇ ಸಾಲಿನ ಕಾರ್ಯಯೋಜನೆಯಡಿ ವಿಕ್ಷಿತ್ ಭಾರತ್ ಪಾದಯಾತ್ರೆ, ಸ್ವಚ್ಛತಾ ಅಭಿಯಾನ, ಯೋಗ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಯುವ ಕ್ಲಬ್ ಅಭಿವೃದ್ಧಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಯುವಕರಲ್ಲಿ ನಾಗರಿಕ ಜವಾಬ್ದಾರಿ, ರಾಷ್ಟ್ರ ನಿರ್ಮಾಣದ ಮನೋಭಾವ ಹಾಗೂ ಸಾಮಾಜಿಕ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.
ಸಭೆಯಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ. ರವಿಶಂಕರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತೆ ಬೇಬಿ ಮ್ಯಾಥ್ಯು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.


