ಮಡಿಕೇರಿ ವ್ಯಾಪ್ತಿಯಲ್ಲಿ ಭಾರೀ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
ಮಡಿಕೇರಿ: ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬುಧವಾರ ಸಂಜೆದಿಂದ ಭಾರೀ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ವರುಣ ಅಬ್ಬರ ಮುಂದುವರಿದಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ.
ಮಡಿಕೇರಿ, ಮಾದಾಪುರ, ನಾಪೋಕ್ಲು, ಚೇರಂಬಾನೆ, ಭಾಗಮಂಡಲ, ಮೂರ್ನಾಡು ಹಾಗೂ ಗಾಳಿಬೇಡು ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದೆ. ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬಂದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ಹರಿಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.
ಇದೇ ವೇಳೆ ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜಲಾಶಯದ ನೀರಿನ ಮಟ್ಟವನ್ನು ಸಂಬಂಧಪಟ್ಟ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.
ರಾತ್ರಿಯಿಡೀ ಇದೇ ರೀತಿಯ ಮಳೆ ಮುಂದುವರಿದರೆ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿ ಗುರುವಾರ ಶಾಲಾ ಮಕ್ಕಳಿಗೆ ಜಿಲ್ಲಾಡಳಿತ ರಜೆ ಘೋಷಿಸುವ ಸಾಧ್ಯತೆಯಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಆದರೆ ಈ ಕುರಿತು ಜಿಲ್ಲಾಡಳಿತದಿಂದ ಅಧಿಕೃತ ಆದೇಶ ಇನ್ನೂ ಪ್ರಕಟವಾಗಿಲ್ಲ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರ ಸಂಚಾರ ಮಾಡದಂತೆ ಹಾಗೂ ನದಿ, ಹೊಳೆ, ಗುಡ್ಡಗಾಡು ಪ್ರದೇಶಗಳ ಬಳಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.


