ಭರವಸೆಗಳ ನಡುವೆಯೇ ಹದಗೆಟ್ಟ ರಸ್ತೆ; ಶಾಸಕ–ಸಂಸದರ ವಿರುದ್ಧ ಸಾರ್ವಜನಿಕರ ಆಕ್ರೋಶ

ಮಡಿಕೇರಿ: ಮಡಿಕೇರಿ–ವಿರಾಜಪೇಟೆ ರಾಜ್ಯ ಹೆದ್ದಾರಿ ಇದೀಗ ನೂರಾರು ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಹಾಗೂ ಪ್ರಯಾಣಿಕರು ನಿತ್ಯವೂ ಪರದಾಡುವಂತಾಗಿದೆ. ನಿತ್ಯ ಸಾವಿರಾರು ಜನರ ಸಂಪರ್ಕ ಕೊಂಡಿಯಾಗಿರುವ ರಸ್ತೆ ಈಗ ಗುಂಡಿಗಳ ಸರಮಾಲೆಯನ್ನೇ ಹೊತ್ತಿದೆ. ಪ್ರಮುಖ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ಮಡಿಕೇರಿ ವಿರಾಜಪೇಟೆ ರಸ್ತೆಯ ದುಸ್ಥಿತಿಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಮಳೆಗಾಲ ಮುಗಿದ ಬಳಿಕ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಬೇಸಿಗೆ ಮುಗಿದು ಮತ್ತೆ ಮಳೆಗಾಲ ಆರಂಭವಾದರೂ ರಸ್ತೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಪರಿಣಾಮ, ಈಗಾಗಲೇ ಇದ್ದ ಗುಂಡಿಗಳು ಮತ್ತಷ್ಟು ದೊಡ್ಡದಾಗಿದ್ದು, ಮಳೆ ನೀರು ನಿಂತು ರಸ್ತೆ ಮತ್ತಷ್ಟು ಅಪಾಯಕಾರಿಯಾಗಿದೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕರು ಹಲವು ಬಾರಿ ಧ್ವನಿ ಎತ್ತಿದ್ದಾರೆ. ಜನರ ಆಕ್ರೋಶದ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಿನಿಂದ ಕಾಮಗಾರಿ ಆರಂಭಿಸುವ ಭರವಸೆ ನೀಡಲಾಗಿದೆ. ಆದರೆ ಈ ಭರವಸೆ ಕೂಡ ಹಿಂದಿನ ಭರವಸೆಗಳಂತೆಯೇ ಉಳಿಯುತ್ತದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.

ಶಾಸಕರನ್ನೇ ಪ್ರಶ್ನಿಸುತ್ತಿದ್ದ ಜನ ಈಗ ಸಂಸದರಿಗೂ ಪ್ರಶ್ನೆ
ರಸ್ತೆಯ ದುಸ್ಥಿತಿ ಕುರಿತು ಈ ಹಿಂದೆ ಸ್ಥಳೀಯ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಪ್ರಶ್ನಿಸುತ್ತಿದ್ದ ಸಾರ್ವಜನಿಕರು, ಇದೀಗ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರತ್ತವೂ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಸಂಸದರ ಅನುದಾನದಲ್ಲಿ ಈ ರಸ್ತೆಗೆ ಯಾವುದೇ ಅನುದಾನ ಸಿಗುವುದಿಲ್ಲವೇ?” ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಜಿಲ್ಲಾ ಕೇಂದ್ರ ಹಾಗೂ ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಯೊಂದರ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳೇ ಈ ರೀತಿಯಾಗಿ ಹದಗೆಟ್ಟಿದ್ದರೆ ಅಭಿವೃದ್ಧಿ ಎಲ್ಲಿದೆ? ಜನರು ಪ್ರತಿನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತು ಗುಂಡಿಗಳ ಆಳವೇ ತಿಳಿಯದಂತಾಗಿದೆ. ಅಪಘಾತ ಸಂಭವಿಸಿದ ಬಳಿಕವೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕೇ?” ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತದ ವಿರುದ್ಧವೂ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದು, ಮಡಿಕೇರಿ–ವಿರಾಜಪೇಟೆ ರಸ್ತೆಯ ದುರಸ್ತಿಗೆ ಸ್ಪಷ್ಟ ಕಾಲಮಿತಿ ನಿಗದಿಪಡಿಸಿ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭರವಸೆ ಸಾಕು, ರಸ್ತೆ ಬೇಕು ಎಂಬುದು ಇದೀಗ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರ ಒಕ್ಕೊರಲಿನ ಆಗ್ರಹವಾಗಿದೆ.

Exit mobile version