ಮಡಿಕೇರಿ: ಕಷ್ಟಪಟ್ಟು ದುಡಿದು ಸಂಪಾದಿಸಿದ್ದ ಹಣ ಹಾಗೂ ಚಿನ್ನಾಭರಣವನ್ನು ಕಳೆದುಕೊಂಡು ಐದು ವರ್ಷ ಕಳೆದರೂ ನ್ಯಾಯ ಸಿಗದ ನೋವಿನಲ್ಲಿ ದರೋಡೆ ಪ್ರಕರಣದ ಸಂತ್ರಸ್ತೆ ಕಣ್ಣೀರಿಟ್ಟಿದ್ದಾರೆ. ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಬೇಕಾದ ಪೊಲೀಸರು ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸುಂಟಿಕೊಪ್ಪ ಸಮೀಪದ ಹಾರಬೈಲು ಗ್ರಾಮದ ಸರೋಜಿನಿ ಆರೋಪಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2021ರ ಏಪ್ರಿಲ್ 27ರಂದು ಸಂಜೆ ಸುಮಾರು 7.30ರ ವೇಳೆಗೆ ಮನೆಯ ಹಿಂಭಾಗದಿಂದ ಒಳನುಗ್ಗಿದ ಮೂವರು ಅಪರಿಚಿತ ವ್ಯಕ್ತಿಗಳು ತನ್ನನ್ನು ಗೋಡೆಗೆ ಒತ್ತಿ ಹಿಡಿದು, ಬಾಯಿಗೆ ಬಟ್ಟೆ ತುರುಕಿ ಹಿಂಸೆ ನೀಡಿದ್ದರು ಎಂದು ಆರೋಪಿಸಿದರು.
ಈ ವೇಳೆ ತಾನು ಪ್ರಜ್ಞಾಹೀನಳಾಗಿ ಬಿದ್ದಿದ್ದು, ನಂತರ ಎಚ್ಚರಗೊಂಡಾಗ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು ₹3.90 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವಾಗಿರುವುದು ಗಮನಕ್ಕೆ ಬಂದಿತ್ತು ಎಂದು ಹೇಳಿದರು.
ಘಟನೆ ನಡೆದ ದಿನವೇ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರೂ, ಐದು ವರ್ಷ ಕಳೆದರೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ದೊರೆತಿಲ್ಲ ಎಂದು ಸರೋಜಿನಿ ಅಸಮಾಧಾನ ವ್ಯಕ್ತಪಡಿಸಿದರು.
“ಕಷ್ಟಪಟ್ಟು ದುಡಿದು ಸಂಪಾದಿಸಿದ್ದ ಹಣ ಹಾಗೂ ಚಿನ್ನಾಭರಣ ಕಳೆದುಕೊಂಡಿದ್ದೇನೆ. ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬುದೂ ನನಗೆ ಸ್ಪಷ್ಟವಾಗಿಲ್ಲ. ಐದು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ” ಎಂದು ಅವರು ಕಣ್ಣೀರಿಟ್ಟರು.
ಸಾಮಾನ್ಯ ನಾಗರಿಕಳಾಗಿ ಕಾನೂನಿನ ಮೇಲೆ ನಂಬಿಕೆ ಹೊಂದಿದ್ದೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಮೂಲಕ ತನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸರೋಜಿನಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸರೋಜಿನಿ ಅವರ ಮೈದುನ ಬಿ.ಕೆ. ದಿನೇಶ್ ಉಪಸ್ಥಿತರಿದ್ದರು.

