ಆ.7: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ತಿರುಮಲ ಎಸ್ಟೇಟ್‌ನಲ್ಲಿ ಕಾನೂನುಬಾಹಿರವಾಗಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರನ್ನು ಗೋಣಿಕೊಪ್ಪಲು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 6 ಕೆ.ಜಿ. 950 ಗ್ರಾಂ ಒಣಗಿದ ಗಾಂಜಾ ಹಾಗೂ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ 2026ರ ಆಗಸ್ಟ್ 5ರಂದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಮೊ.ಸಂ.100/2026 ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್. ಅವರ ಉಸ್ತುವಾರಿಯಲ್ಲಿ, ಗೋಣಿಕೊಪ್ಪಲು ವೃತ್ತದ ಸಿಐ ಶಿವರಾಜ್ ಆರ್. ಹಾಗೂ ಪಿಎಸ್‌ಐ ಕಾಳೇಗೌಡ ಅವರ ನೇತೃತ್ವದಲ್ಲಿ ನಡೆದಿದ್ದು, ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಪ್ರಶಂಸಿಸಿದೆ.
ಪೊಲೀಸರ ಮನವಿ: ಹೊರ ರಾಜ್ಯದ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮುನ್ನ ಕಡ್ಡಾಯವಾಗಿ ಪೊಲೀಸ್ ಪರಿಶೀಲನೆ (Police Verification) ನಡೆಸಬೇಕು. ಮಾದಕ ವಸ್ತುಗಳ ಬಳಕೆ ಅಥವಾ ಮಾರಾಟದ ಬಗ್ಗೆ ಮಾಹಿತಿ ಕಂಡುಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆ ಅಥವಾ KSP App ಮೂಲಕ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Exit mobile version