ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
ವಿರಾಜಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ವಿರಾಜಪೇಟೆ ತಾಲೂಕಿನ ಕೊಮ್ಮೆತೋಡು ಗ್ರಾಮದಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಕ್ರೀಡಾಕೂಟಕ್ಕೆ ಶುಭ ಹಾರೈಸಿ ಮಾತನಾಡಿದ ಶಾಸಕ ಪೊನ್ನಣ್ಣ, ಕೊಡಗು ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪ್ರಸಿದ್ಧವಾಗಿರುವ ಕೆಸರುಗದ್ದೆ ಕ್ರೀಡೆ ಇಂದಿಗೂ ಯುವಜನರನ್ನು ಆಕರ್ಷಿಸುತ್ತಿದೆ ಎಂದರು.
ನಮ್ಮ ಪೂರ್ವಜರು ಗದ್ದೆಯಲ್ಲಿ ನಾಟಿ ಕಾರ್ಯ ಆರಂಭಿಸುವ ಮುನ್ನವೇ ಕೆಸರುಗದ್ದೆ ಕ್ರೀಡೆಗಳನ್ನು ಆಯೋಜಿಸುತ್ತಿದ್ದರು. ಗದ್ದೆಯ ಮಣ್ಣನ್ನು ಕೃಷಿಗೆ ಮತ್ತಷ್ಟು ಯೋಗ್ಯಗೊಳಿಸುವ ಉದ್ದೇಶವೂ ಈ ಕ್ರೀಡೆಯ ಹಿಂದೆ ಅಡಗಿತ್ತು. ಹೀಗಾಗಿ ಗ್ರಾಮೀಣ ಕ್ರೀಡೆಗಳು ಕೇವಲ ಮನರಂಜನೆಯಲ್ಲ, ಕೃಷಿ ಬದುಕು ಹಾಗೂ ನಮ್ಮ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಪರಂಪರೆಯ ಭಾಗವಾಗಿವೆ ಎಂದು ಅವರು ಹೇಳಿದರು.
ಇಂತಹ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಸಕರು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಅಕಾಡೆಮಿಯ ಗೌರವಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ಅಧ್ಯಕ್ಷ ಆಲೀರ ಎಂ. ರಶೀದ್, ಹಿರಿಯ ಉಪಾಧ್ಯಕ್ಷ ಕುಂಇ ಅಬ್ದುಲ್ಲಾ, ಪ್ರಧಾನ ಕಾರ್ಯದರ್ಶಿ ಮೀತಲ್ ತಂಡ ಎಂ. ಇಸ್ಮಾಯಿಲ್, ಕಾರ್ಯದರ್ಶಿ ಅಶ್ರಫ್, ಕ್ರೀಡಾ ಸಂಚಾಲಕರಾದ ಅಂದಾಯಿ ಹಾಗೂ ಅಶ್ರಫ್, ನಿರ್ದೇಶಕರಾದ ಶಾಫಿಕ್, ಹಂಸ, ಸಿರಾಜ್, ಮುನ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ವಿರಾಜಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ನಾಪೋಕ್ಲು ಬ್ಲಾಕ್ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು, ಕ್ರೀಡಾಪ್ರೇಮಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

