ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ಸಭೆ ನಡೆಯಿತು.

ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪರಿಶಿಷ್ಟ ಸಮುದಾಯದ ಸದಸ್ಯರು ಭೂ ವಿವಾದ, ದೌರ್ಜನ್ಯ, ಸುಳ್ಳು ಪ್ರಕರಣ, ಅಕ್ರಮ ಮದ್ಯ ಮಾರಾಟ ಹಾಗೂ ಮಾದಕ ವಸ್ತುಗಳ ಕುರಿತು ತಮ್ಮ ಅಹವಾಲುಗಳನ್ನು ಮಂಡಿಸಿದರು.

ಸಭೆಯಲ್ಲಿ ಮಾತನಾಡಿದ ಎಸ್‌ಪಿ ಬಿಂದುಮಣಿ, ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸೂಕ್ತ ಸ್ಪಂದನೆ ದೊರೆಯದಿದ್ದರೆ ತಮ್ಮ ಗಮನಕ್ಕೆ ತರಬಹುದು. ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಇಲಾಖೆಯ ಆದ್ಯತೆಯಾಗಿದೆ ಎಂದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಕಳೆದ ಎಂಟು ತಿಂಗಳಲ್ಲಿ 237 ಪ್ರಕರಣ ದಾಖಲಿಸಿ, 333 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಹಾಡಿ ಪ್ರದೇಶಗಳು ಸೇರಿದಂತೆ ವಿವಿಧೆಡೆ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕೊಡ್ಲಿಪೇಟೆಯ ಜನಾರ್ಧನ ಜೆ.ಎಲ್. ಅವರು ಶನಿವಾರಸಂತೆ, ಕೊಡ್ಲಿಪೇಟೆ ಭಾಗದಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೂ ಹೆಚ್ಚಿನ ಆದ್ಯತೆ ನೀಡುವಂತೆ ಕೋರಿದರು.

ವೀರೇಂದ್ರ ಅವರು ಕೆಲವು ಪೊಲೀಸ್ ಠಾಣೆಗಳಲ್ಲಿ ದೂರುಗಳ ಸರಿಯಾದ ವಿಚಾರಣೆ ನಡೆಸದೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿ, ಪ್ರಕರಣ ದಾಖಲಿಸುವ ಮುನ್ನ ಸಮಗ್ರ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

ದೇವರಾಜು ಅವರು ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಪರಿಶಿಷ್ಟರ ಭೂಮಿ ಒತ್ತುವರಿ ಪ್ರಕರಣಗಳಿದ್ದು, ಕಂದಾಯ ಹಾಗೂ ಪೊಲೀಸ್ ಇಲಾಖೆ ಜಂಟಿ ಸರ್ವೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕೆ.ಬಿ. ರಾಜು ಅವರು ಪ್ರತೀ ತಾಲೂಕಿನಲ್ಲಿ ಮೂರು ತಿಂಗಳಿಗೊಮ್ಮೆ ಪರಿಶಿಷ್ಟರ ಕುಂದುಕೊರತೆ ಸಭೆ ನಡೆಸುವಂತೆ ಸಲಹೆ ನೀಡಿದರು. ಪಿ.ಪಿ. ಸುಕುಮಾರ್ ಅವರು ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು.

ಡಿವೈಎಸ್‌ಪಿ ಮಹೇಶ್ ಕುಮಾರ್ ಅವರು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. 112, 181 ಹಾಗೂ 1098 ಸಹಾಯವಾಣಿಗಳಿಗೆ ದೂರು ಬಂದರೆ ತ್ವರಿತವಾಗಿ ಸ್ಪಂದಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಡಿವೈಎಸ್‌ಪಿಗಳಾದ ಚಂದ್ರಶೇಖರ್, ಸೂರಜ್, ಹಿರಿಯ ಪೊಲೀಸ್ ಅಧಿಕಾರಿ ಐ.ಪಿ. ಮೇದಪ್ಪ, ಪಿಎಸ್‌ಐ ನವೀನ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Exit mobile version