ಹೊದವಾಡ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಅರಿವು ಕಾರ್ಯಗಾರ – ಆಕರ್ಷಣೆಗೆ ಒಳಗಾಗದೆ ವಿದ್ಯಾರ್ಥಿಗಳು ಓದಿನೆಡೆಗೆ ಒತ್ತು ನೀಡಿ-ಶೀಲಾ ಅಶೋಕ್

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು: ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ವಿದ್ಯಾರ್ಥಿಗಳು ಓದಿನೆಡೆಗೆ ಒತ್ತು ನೀಡಬೇಕೆಂದು ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಅವರು ಹೇಳಿದರು.
ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಕ್ಕಳು ಶಿಕ್ಷಣವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಓದುವ ವಯಸ್ಸಿನಲ್ಲಿ ಯಾವುದೇ ಆರ್ಕಷಣೆಗೆ ಒಳಗಾಗಬಾರದು ಎಂದರು. ಬಳಿಕ ಸುರಕ್ಷಿತ ಮತ್ತು ಅಸುರಕ್ಷಿತ ಸ್ವರ್ಶಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಮಕ್ಕಳು ಯಾವುದೇ ದೌರ್ಜನ್ಯಕ್ಕೆ ಒಳಗಾದರೆ ಮಕ್ಕಳ ಸಹಾಯವಾಣಿ 1098ಸಂಖ್ಯೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ಜಿಲ್ಲಾ ಮಹಿಳಾ ಮಿಷನ್ ಶಕ್ತಿ ಸಂಯೋಜಕರಾದ ಮಮತ ಅವರು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಮಾತನಾಡಿ ಹೆಣ್ಣು ಮಕ್ಕಳನ್ನು ರಕ್ಷಿಸಿ ಓದಿಸಿಬೇಕು ಹಾಗೂ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಸಮಾನತೆ ನೀಡಬೇಕೆಂದು ತಿಳಿಸಿದರು. ನಂತರ ಬಾಲ್ಯ ವಿವಾಹ ಕುರಿತು ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ನಂತರ ಗಂಡು ಮಕ್ಕಳಿಗೆ 21 ವರ್ಷ ತುಂಬಿದ ನಂತರ ವಿವಾಹ ಆಗಬೇಕು ಎಂದು ತಿಳಿಸಿದರು. ಅಕ್ಕಪಡೆ ಯೋಜನೆ ಕುರಿತು ಈ ಯೋಜನೆಯು ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಉದ್ದೇಶದಿಂದ ಯೋಜನೆಯನ್ನು ಜಾರಿಗೆತರಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಎಚ್. ಎ. ಹಂಸ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಹೊದ್ದೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವತ್ಸಲ,ಉಪಾಧ್ಯಕ್ಷೆ ಕುಸುಮಾವತಿ, ಪಂಚಾಯತ್ ಸದಸ್ಯರಾದ ಹಮೀದ್,ಹೊದವಾಡ ಸರ್ಕಾರಿ ಪ್ರೌಡ ಶಾಲೆ ಮುಖ್ಯ ಶಿಕ್ಷಕ ಅಶೋಕ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಾದಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಶೋಭಾ,ಸಂಬ್ರಿನ,ಶ್ರುತಿ,ತುಳಸಿ ಶಾರದಾ,ಸುಮಾ,ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

